Friday, September 20, 2024

DAP Fertilizer-ಕೃಷಿ ಇಲಾಖೆಯಿಂದ ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಕಾಂಪ್ಲೆಕ್ಸ್‌ ರಸಗೊಬ್ಬರಗಳ ಬಳಕೆಗೆ ಸೂಚನೆ.

ಸಸ್ಯಗಳ ಬೆಳವಣಿಗೆಗೆ ಮತ್ತು ಅಭಿವೃದ್ಧಿಗೆ 17 ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತವೆ.

ಉಳಿದ 14 ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಷ್‌ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಪ್ರಧಾನ ಪೋಷಕಾಂಶಗಳೆಂದು, ಕ್ಯಾಲ್ಸಿಯಂ, ಮೆಗ್ನಿಷಿಯಂ, ಗಂಧಕ, ಕಬ್ಬಿಣ, ಜಿಂಕ್‌, ಬೋರಾನ್‌, ತಾಮ್ರ, ಮ್ಯಾಂಗನೀಸ್‌, ಮಾಲಿಬ್ಡಿನಂ, ಕ್ಲೋರಿನ್‌ ಮತ್ತು ನಿಕ್ಕಲ್‌ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು ಇವುಗಳನ್ನು ಲಘು ಪೋಷಕಾಂಶಗಳೆಂದು ವಿಂಗಡಿಸಲಾಗಿದೆ. ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.

ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯ ಹಾಗೂ ಡಿ.ಎ.ಪಿ.ಯನ್ನು  ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ.  ಆದರೆ ಬೆಳೆಗಳಿಗೆ ಬರ ಮತ್ತು ರೋಗ ನಿರೋಧಕ ಶಕ್ತಿ  ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್‌ ಲಭ್ಯವಿರುವುದಿಲ್ಲ. ಆದ್ದರಿಂದ ಡಿ.ಎ.ಪಿ ಗೊಬ್ಬರದ ಬಳಕೆ ಬದಲಿಗೆ ಕಾಂಪ್ಲೆಕ್ಸ್‌ ಗೊಬ್ಬರ ಬಳಕೆ ಮಾಡಲು ತಿಳಿಸಲಾಗುತ್ತಿದೆ.

ಇದನ್ನೂ ಓದಿ:ವಿದ್ಯಾರ್ಥಿಗಳ ಬಸ್‌ ಪಾಸ್‌ ಗೆ ಆನ್ಲೈನ್‌ ಅರ್ಜಿ ಸಲ್ಲಿಕೆ ಆರಂಭ.

ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ (ಗ್ರೇಡ್)‌ ಸಾರಜನಕ, ರಂಜಕ, ಮತ್ತು ಪೊಟ್ಯಾಷ್‌ ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬಹುದಾಗಿದೆ.

ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ: ರಂಜಕ: ಪೊಟ್ಯಾಷ್‌ ರಸಗೊಬ್ಬರಗಳನ್ನು 4:2:1 ರ ಅನುಪಾತದಲ್ಲಿ ಬಳಸಬೇಕಾಗಿರುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ರೈತರು ಬಳಸುತ್ತಿರುವ ರಸಗೊಬ್ಬರಗಳ ಅನುಪಾತವು 5:3:1 ಆಗಿರುತ್ತದೆ. ರೈತರಲ್ಲಿ ಸಮತೋಲನಾತ್ಮಕ ರಸಗೊಬ್ಬರ ಬಳಕೆಯನ್ನು ಉತ್ತೇಜಿಸಲು ಪೊಟ್ಯಾಷ್‌ ಯುಕ್ತ ಕಾಂಪ್ಲೆಕ್ಸ್‌ ರಸಗೊಬ್ಬರಗಳ ಬಳಕೆ ಅತೀ ಮುಖ್ಯವಾಗಿರುತ್ತದೆ.

ಅಲ್ಲದೇ ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ರಸಗೊಬ್ಬರಕ್ಕೆ, ಆದ್ಯತೆ ನೀಡದೆ ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಬಳಕೆಯಿಂದ ಎಣ್ಣೆಕಾಳು ಬೆಳೆಗಳಲ್ಲಿ ಕಾಳಿನ ಗಾತ್ರ ಹೆಚ್ಚಾಗಿ ಉತ್ತಮ ಇಳುವರಿ ಪಡೆಯಲು ಸಾಧ್ಯವಾಗುತ್ತದೆ. ಪೊಟ್ಯಾಷ್‌ ಒದಗಿಸುವ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 22:22:11, 14:35:14, 17:17:17, 14:28:14, 19:19:19, 20:10:10, 9:24:24, 8:21:21 ಮತ್ತು 24:24:0 ಇತ್ಯಾದಿ ಕಾಂಪ್ಲೆಕ್ಸ್‌ ರಸಗೊಬ್ಬರಗಳನ್ನು ಸಹ ಬಳಸಬಹುದಾಗಿದೆ.

ಇದನ್ನೂ ಓದಿ:ಮುಂಗಾರು ಹಂಗಾಮಿನ ಬೆಳೆ ವಿಮೆ ಮಾಡಿಸಲು ಅವಕಾಶ ನೀಡಲಾಗಿದೆ.

ಆದುದರಿಂದ ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ರಸಗೊಬ್ಬರಕ್ಕೆ, ಆದ್ಯತೆ ನೀಡದೆ, ಡಿ.ಎ.ಪಿ ರಸಗೊಬ್ಬರಗಳನ್ನು ಬಳಕೆ ಮಾಡವ ಬದಲು ಬರ ಮತ್ತು ರೋಗ ನಿರೋಧಕ ಶಕ್ತಿ ನೀಡಿ, ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್ಯ ಯುಕ್ತ ವಿವಿಧ(ಗ್ರೇಡ) ಶ್ರೇಣಿಯ ರಸಗೊಬ್ಬರಗಳ ಶಿಫಾರಸ್ಸಿನ ಪ್ರಮಾಣದಲ್ಲಿ ಸಮತೋಲನಾತ್ಮಕವಾಗಿ ಬಳಕೆ ಮಾಡುವುದರ ಮೂಲಕ ಉತ್ತಮ ಇಳುವರಿ ಪಡೆಯಲು ಹಾಗೂ ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳಲು ಎಲ್ಲಾ ರೈತ ಭಾಂದವರಿಗೆ ಕೃಷಿ ಇಲಾಖೆಯಿಂದ ವಿನಂತಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ: ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಭೇಟಿ ನೀಡಿ.

ಇತ್ತೀಚಿನ ಸುದ್ದಿಗಳು

Related Articles